ಕೇರಳ ಪ್ರವೇಶಿಸಿದ ಮಾನ್ಸೂನ್ ; ಇನ್ನೆರಡು ದಿನಗಳಲ್ಲಿ ರಾಜ್ಯಕ್ಕೆ?

ಬೆಂಗಳೂರು : ಮಾನ್ಸೂನ್ ಮಾರುತ ಕೇರಳ ಪ್ರವೇಶಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಖಚಿತಪಡಿಸಿದ್ದು, ಇನ್ನೆರಡು ದಿನಗಳಲ್ಲಿ ರಾಜ್ಯಕ್ಕೂ ಪ್ರವೇಶಿಸುವ ಸಾಧ್ಯತೆಯಿದೆ. ಕೇರಳದ ದಕ್ಷಿಣ ಭಾಗಗಳಿಗೆ ನೈರುತ್ಯ ಮಾನ್ಸೂನ್ ಪ್ರವೇಶಿಸಿದೆ.
ಸಾಮಾನ್ಯವಾಗಿ ಜೂನ್ 1ರಂದೇ ನೈರುತ್ಯ ಮಾನ್ಸೂನ್ ಮಾರುತಗಳು ಕೇರಳ ಪ್ರವೇಶಿಸುತ್ತಿದ್ದವು. ಆದರೆ ಈ ವರ್ಷ 2 ದಿನಗಳ ಕಾಲ ತಡವಾಗಿದೆ. ಕೇರಳ ಪ್ರವೇಶಿಸಿರುವ ಮಾನ್ಸೂನ್ ಮಾರುತಗಳು ಭಾರತದಲ್ಲಿ ನಾಲ್ಕು ತಿಂಗಳ ಕಾಲ ಸುಧೀರ್ಘ ಮಳೆಗಾಲದ ಆರಂಭವನ್ನು ಸೂಚಿಸುತ್ತವೆ. ಅರಬ್ಬಿ ಸಮುದ್ರ ದಕ್ಷಿಣ ಭಾಗ, ಲಕ್ಷದ್ವೀಪ ಪ್ರದೇಶ, ದಕ್ಷಿಣ ಕೇರಳ, ದಕ್ಷಿಣ ತಮಿಳುನಾಡು, ಕೊಮೊರಿನ್- ಮಾಲ್ಡೀವ್ಸ್ ನ ಕೆಲ ಭಾಗಗಳು ಹಾಗೂ ಬಂಗಾಳಕೊಲ್ಲಿಯ ನೈರುತ್ಯ ಭಾಗಗಳಲ್ಲಿ ಇಂದು ಮಳೆಯಾಗಲಿದೆ.
ಉಳಿದಂತೆ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು, ಅರಬ್ಬಿ ಸಮುದ್ರದ ದಕ್ಷಿಣ ಹಾಗೂ ಮಧ್ಯ ಭಾಗ, ಕೇರಳ, ಲಕ್ಷದ್ವೀಪದ ಉಳಿದ ಭಾಗ, ತಮಿಳುನಾಡು ಹಾಗೂ ಪುದುಚೇರಿಯ ಕೆಲವು ಭಾಗಗಳು, ರಾಯಲ್ಸೀಮಾ, ಬಂಗಾಳ ಕೊಲ್ಲಿಯ ದಕ್ಷಿಣ ಹಾಗೂ ಮಧ್ಯ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಮಾನ್ಸೂನ್ ಮಾರುತಗಳು ಮಳೆ ಸುರಿಸಲಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಮೇ 31 ಅಂದರೆ ಸಾಮಾನ್ಯವಾಗಿ ಆರಂಭವಾಗುವ ದಿನಕ್ಕಿಂದ ಒಂದು ದಿನ ಮುಂಚಿತವಾಗಿಯೇ ಮಾನ್ಸೂನ್ ಮಾರುತಗಳು ಕೇರಳ ಪ್ರವೇಶಿಸಲಿವೆ ಎಂದು ಹವಾಮಾನ ಇಲಾಖೆ ಹೇಳಿತ್ತು.