BREAKING NEWS:
ಬೆಂಗಳೂರು: ಬರುವ ಆಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ ದರ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳ ಚಿತ್ರಮಂದಿರ ಹಾಗೂ ಪಬ್ ಗಳಲ್ಲಿ ಶೇ.100ರಷ್ಟು ಆಸನಗಳ ಭರ್ತಿಗೆ ಅವಕಾಶ ನೀಡಲು ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶುಕ್ರವಾರ ಕೋವಿಡ್ ಸ್ಥಿತಿಗತಿ ಕುರಿತು ನಡೆದ ತಜ್ಞರ ಪರಿಶೀಲನಾ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಪಾಸಿಟಿವಿಟಿ ದರ ಶೇ.1ಕ್ಕಿಂತ ಹೆಚ್ಚಾದರೆ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಸೀಟುಗಳ ಬರ್ತಿಗೆ ಅವಕಾಶ ಕಲ್ಪಿಸಲು ಸಭೆ ನಿರ್ಧರಿಸಿದೆ. ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಾದರೆ ಚಿತ್ರಮಂದಿರಗಳನ್ನು ಬಂದ್ ಮಾಡುವ ಮಹತ್ವದ ತೀರ್ಮಾನವನ್ನು ಸಭೆ ತೆಗೆದುಕೊಂಡಿದೆ.
ಪಬ್ ಗಳಿಗೂ ಇದೇ ಮಾನದಂಡ ಅನುಸರಿಸಲು ತೀರ್ಮಾನಿಸಿರುವ ಸರ್ಕಾರ, ಕನಿಷ್ಠ ಒಂದು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಪ್ರವೇಶಾವಕಾಶ ನೀಡಲು ನಿರ್ಧರಿಸಿದೆ. ಗರ್ಭಿಣಿಯರು ಮತ್ತು ಮಕ್ಕಳಿಗೆ ಪ್ರವೇಶಾವಕಾಶ ನಿರಾಕರಿಸಲಾಗಿದೆ.
ಆರರಿಂದ ದ್ವಿತೀಯ ಪಿಯುಸಿವರೆಗೆ ವಾರದಲ್ಲಿ ಐದು ದಿನ ಪೂರ್ಣಪ್ರಮಾಣದ ಹಾಜರಾತಿಗೆ ಅವಕಾಶ ಕಲ್ಪಿಸಲು ಮುಂದಾಗಿದೆ. ನಾಡಹಬ್ಬ ದಸರಾ ಕುರಿತು ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲು ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಯಾದಗಿರಿ, ರಾಯಚೂರು, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕೋವಿಡ್ 19 ಲಸಿಕೆ ಅಭಿಯಾನ ತೀರ್ವಗೊಳಿಸಲು ಹಾಗೂ ಗಡಿ ಜಿಲ್ಲೆಗಳಲ್ಲಿ ಹಾಗೂ ಗಡಿ ಜಿಲ್ಲೆಗಳಲ್ಲಿ ತೀವ್ರ ನಿಗಾವಹಿಸಲು ಸಭೆ ತೀರ್ಮಾನಿಸಿದೆ